ಬೆಂಗಳೂರು : “ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ”
ಬೆಂಗಳೂರಿನ ಟ್ರಿನಿಟಿ ವೃತದಲ್ಲಿ ಸೋಮವಾರ ನಡೆದ “ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ” ಪ್ರದರ್ಶನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವ ದಿನೇಶ್ ಗುಂಡೂರಾವ್, ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಮತ್ತಿತರರು ಭಾಗವಹಿಸಿದ್ದರು.
ಭ್ರಷ್ಟಾಚಾರ ತೊಲಗಿಸಿ ಬೆಂಗಳೂರು ಉಳಿಸಿ ಎಂಬ ಘೋಷಣೆ ಮೂಲಕ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಂಗಳೂರಿನ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಮ್ಮ ಕಾರ್ಯಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ. ಕೋಲಾರದಲ್ಲಿ ಇಂದು ಪ್ರಜಾಧ್ವನಿ ಯಾತ್ರೆ ಸಮಾವೇಶ ನಡೆಯಲಿದ್ದು, ಮಾರ್ಗ ಮಧ್ಯದಲ್ಲಿ ಟ್ರಿನಿಟಿ ವೃತ್ತದ ಬಳಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಕ್ಷದ ನಾಯಕರೆಲ್ಲರೂ ಪಾಲ್ಗೊಂಡಿದ್ದೇವೆ.
ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿದ್ದು, ಬೆಂಗಳೂರು ರಸ್ತೆ ಗುಂಡಿಗಳ ರಾಜಧಾನಿಯಾಗಿದೆ. ಕಸದ ಸಮಸ್ಯೆ ಹೆಚ್ಚಾಗಿದೆ. 40% ಕಮಿಷನ್ ಭ್ರಷ್ಟಾಚಾರದಿಂದ ನಗರದ ಕಾಮಗಾರಿಗಳು ಕಳಪೆಯಾಗಿವೆ. ದೇಶದಲ್ಲಿ ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ.
ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಅನೇಕ ಸಾವುಗಳು ಸಂಭವಿಸಿದ್ದು, ಬಿಜೆಪಿ ಸರ್ಕಾರ ಈ ಸಮಸ್ಯೆಗೆ ಪರಿಹಾರ ನೀಡುವಲ್ಲಿ ವಿಫಲವಾಗಿದೆ.
ಇದಕ್ಕೆಲ್ಲ ಉತ್ತರ ನೀಡುವವರು ಯಾರು? ಸರ್ಕಾರದ ದುರಾಡಳಿತದ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಕೇಳಲಾದ ಪ್ರಶ್ನೆಗಳಿಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಬಿಜೆಪಿ ಸರ್ಕಾರಕ್ಕೆ ಬೆಂಗಳೂರು ನಗರ ಹಾಗೂ ರಾಜ್ಯದ ಜನರಿಗೆ ನೀಡಿದ್ದ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಜನರ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರಕಾರದಿಂದ ಮಾತ್ರ ಸಾಧ್ಯ. ನಾವು ಜನರ ಧ್ವನಿಯಾಗಿ ಕೆಲಸ ಮಾಡಲು ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ.
ಕೆಲದಿನಗಳ ಹಿಂದೆ ನಾನು ಬೀದಿ ಬದಿ ವ್ಯಾಪಾರಿಗಳ ಸಮಾವೇಶದಲ್ಲಿ ಭಾಗವಹಿಸಿದ್ದೆ. ಅವರು ದಿನನಿತ್ಯ ವ್ಯಾಪಾರ ಮಾಡಲು ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರಿಂದ ಹೆಚ್ಚಿನ ಕಿರುಕುಳ ಎದುರಿಸುತ್ತಿದ್ದಾರೆ. ಪ್ರತಿ ಕ್ಷೇತ್ರದಲ್ಲಿ ಬೀದಿ ವ್ಯಾಪಾರಿಗಳಿಂದಲೇ ತಿಂಗಳಿಗೆ ಒಂದು ಕೋಟಿಯಷ್ಟು ಹಣ ಸಂಗ್ರಹಿಸಲಾಗುತ್ತಿದೆ. ನಿತ್ಯ ಪ್ರತಿ ವ್ಯಾಪಾರಿಯಿಂದ ಇನ್ನೂರು, ಮುನ್ನೂರು ರೂಪಾಯಿಗಳನ್ನು ವಸೂಲಿ ಮಾಡಲಾಗುತ್ತಿದೆ. ಈ ಮಟ್ಟದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸುತ್ತಿದೆ.
ಬಿಜೆಪಿ ಸರ್ಕಾರ ಬೀದಿ ವ್ಯಾಪಾರಿಗಳು, ಕಸ ವಿಲೇವಾರಿ ಮಾಡುವರನ್ನು ಬಿಡದೆ ಸುಲಿಗೆ ಮಾಡುತ್ತಿದೆ. ಈ ಬಗ್ಗೆ ನಾವು ಜನರಲ್ಲಿ ಜಾಗೃತಿ ಮೂಡಿಸಬೇಕು.
ಬಿಜೆಪಿ ಸರ್ಕಾರದ ಆಡಳಿತದಲ್ಲಿ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕೇರಿದ್ದು, ಜನರ ಆದಾಯ ಪಾತಾಳಕ್ಕೆ ಕುಸಿಯುತ್ತಿದೆ. ಸರ್ಕಾರದ ದುರಾಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಈ ಪ್ರತಿಭಟನೆ ಹಮ್ಮಿಕೊಂಡಿದೆ.
ಕಾಂಗ್ರೆಸ್ ಪಕ್ಷಕ್ಕೆ ಕೆಲ ಪ್ರಶ್ನೆ ಕೇಳಿ, ಇವುಗಳಿಗೆ ಉತ್ತರ ನೀಡಿದ ನಂತರ ಪ್ರತಿಭಟನೆ ಮಾಡುವಂತೆ ಬಿಜೆಪಿ ಆಗ್ರಹಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ಅವರು, ʼಮುಖ್ಯಮಂತ್ರಿಗಳು ಯಾವುದೇ ಮಾಧ್ಯಮಗಳ ವೇದಿಕೆಯಲ್ಲಿ ಚರ್ಚೆಗೆ ಬರಲಿ, ನಾನು ಅವರೆಲ್ಲ ಪ್ರಶ್ನೆಗಳಿಗೂ ಉತ್ತರ ನೀಡಲು ಸಿದ್ಧನಿದ್ದೇನೆ. ಎಲ್ಲ ವಿಚಾರವಾಗಿ ಚರ್ಚೆ ಮಾಡುತ್ತೇವೆ. ನಾವು ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಕೇಳುತ್ತೇವೆ. ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುವ ಬದಲು ನೇರಾನೇರ ಚರ್ಚೆಗೆ ಬರಲಿ. ನಾವು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ನೂರಕ್ಕೂ ಹೆಚ್ಚು ಪ್ರಶ್ನೆಗಳನ್ನು ದಿನನಿತ್ಯ ಕೇಳುತ್ತಿದ್ದೇವೆ. ಅದರಲ್ಲಿ ಒಂದು ಪ್ರಶ್ನೆಗೂ ಈ ಸರಕಾರ ಉತ್ತರಿಸಿಲ್ಲ. ಅವರು ಸಮಯ ಹಾಗೂ ವೇದಿಕೆ ನಿಗದಿಪಡಿಸಲಿ, ನಾನು ಚರ್ಚೆಗೆ ಬಂದು ಉತ್ತರ ನೀಡುತ್ತೇನೆʼ ಎಂದು ತಿಳಿಸಿದರು.
ವರದಿ: ಸಿಂಚನ ಕೆ

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.


